ಬೆಳಗಾವಿ: ಮಹದಾಯಿ ಸೇರಿದಂತೆ ರಾಜ್ಯದ ಪ್ರಮುಖ ಕುಡಿಯುವ ಮತ್ತು ನೀರಾವರಿ ಯೋಜನೆಗಳಿಗೆ ಕೇಂದ್ರ ಸರಕಾರ ಅಡ್ಡಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ. ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದರೆ ನಾಳೆಯೇ ಕೆಲಸ ಆರಂಭಿಸುತ್ತೇವೆ ಎಂದರು. ಮೇಕೆದಾಟು ಯೋಜನೆಗೆ ತಮಿಳುನಾಡು ತಕರಾರು ಮಾಡುತ್ತದೆ ಎಂದು ಕೇಂದ್ರ ಸರಕಾರ ಅನುಮತಿ ನೀಡುತ್ತಿಲ್ಲ. ಈ ಯೋಜನೆಗೆ ನಾವು ಕೇಂದ್ರದ ಅನುಮತಿ ಕಾಯುತ್ತಿದ್ದೇವೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಹ ಕೇಂದ್ರ ಸರಕಾರ ಸಹಕಾರ ನೀಡುತ್ತಿಲ್ಲ. ಅನುಮತಿ ಕೊಟ್ಟರೆ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸುತ್ತೇವೆ. ಇದರಿಂದ ರೈತರಿಗೆ ಬಹಳ ಅನುಕೂಲವಾಗುತ್ತದೆ ಎಂದರು. ಎಲ್ಲದಕ್ಕೂ ಅಡ್ಡಿ ಮಾಡುತ್ತಿರುವ ಕೇಂದ್ರ ಸರ್ಕಾರ ರಾಜ್ಯದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದರು.
ರಾಜ್ಯ ನೀರಾವರಿ ಯೋಜನೆಗಳಿಗೆ ಕೇಂದ್ರ ಅನುಮತಿಸುತ್ತಿಲ್ಲ-ಸಿದ್ದರಾಮಯ್ಯ
2025-04-20 17:10:21- 7