ಬೆಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಪರಮೇಶ್ವರ್ ಅವರು ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಗುರುವಾರ ರಾತ್ರಿ 8.30 ಗಂಟೆಗೆ ಈ ಘಟನೆ ನಡೆದಿದೆ. ಸುಹಾಸ್ ಶೆಟ್ಟಿ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈಗಾಗಲೇ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಯಾರು ಈ ಕೆಲಸ ಮಾಡಿದ್ದಾರೆ ಅವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಮಂಗಳೂರಿನಲ್ಲಿ ನಡೆದ ಎರಡು ಕೊಲೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ನಾವು ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡುವುದಿಲ್ಲ. ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಜನರು ಶಾಂತಿ ಕಾಪಾಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಪೊಲೀಸ್ ಇಲಾಖೆಯೂ ನಿಮ್ಮ ಜೊತೆಗಿದೆ. ಈಗಾಗಲೇ ಹಿರಿಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಆಗಬಾರದು. ಘಟನೆಯ ಬಗ್ಗೆ ವರದಿ ಕೇಳಲಾಗಿದೆ. ಇಂತಹ ಘಟನೆಗಳನ್ನು ಯಾವ ಕಾರಣಕ್ಕೂ ಬೆಳೆಯುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಮಂಗಳೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಡಲು ಸಚಿವ ಪರಮೇಶ್ವರ್ ಮನವಿ
2025-05-02 11:30:44- 82