News / Blog Details

  • Home
  • >
  • News / Blog Details

ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ;  ಸಚಿವರಿಗೆ ಸುಪ್ರೀಂ ಕೋರ್ಟ್ ತರಾಟೆ

  • 93
img ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ;  ಸಚಿವರಿಗೆ ಸುಪ್ರೀಂ ಕೋರ್ಟ್ ತರಾಟೆ
Font size:
Print

ನವದೆಹಲಿ: ಕರ್ನಲ್ ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹೇಳಿಕೆ ಸಂಬಂಧ ವಿಚಾರಣೆ ನಡೆಸಿದ್ದ ಜಬ್ಬಲ್ಪುರ ಹೈಕೋರ್ಟ್ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಈ ಆದೇಶದ ಬೆನ್ನಲ್ಲೇ ವಿಜಯ್ ಶಾ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ರೀತಿ ಹೇಳಿಕೆಗಳನ್ನು ನೀಡುವಾಗ ಎಚ್ಚರವಿರಲಿ ಎಂದಿದೆ. ವಿಜಯ್ ಶಾ ನೀಡಿದ ಹೇಳಿಕೆಗಳನ್ನು ಟೀಕಿಸಿದ ಕೋರ್ಟ್, ದೇಶವು ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ ಸಚಿವರು ಜವಾಬ್ದಾರಿಯುತರಾಗಿರಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆ ಎಂದು ಒತ್ತಿ ಹೇಳಿದೆ. ಇನ್ನು ಈ ಹಿಂದೆ ಸಚಿವ ವಿಜಯ್ ಶಾ, ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ನಾವು ಅವರ ಸಹೋದರಿಯನ್ನು ಮುಂದಿಟ್ಟುಕೊಂಡು ತಕ್ಕ ತಿರುಗೇಟು ನೀಡಿದ್ದೇವೆ. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಅವರಿಗೆ ಉತ್ತರ ನೀಡಲು ಮೋದಿ ಅವರ ಸಹೋದರಿಯನ್ನೇ ಕಳುಹಿಸಿದರು. ನಾವು ಪಾಕಿಸ್ತಾನದವರನ್ನು ವಿವಸ್ತ್ರಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಅವರ ಸಮುದಾಯದ ಮಗಳನ್ನು ಅವರ ಮೇಲಿನ ದಾಳಿಗೆ ಕಳುಹಿಸಿದ್ದೇವೆ. ನಿಮ್ಮದೇ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾಳೆ. ನಿಮ್ಮ ಜಾತಿಯ ಹೆಣ್ಣುಮಕ್ಕಳನ್ನು ಸೇಡು ತೀರಿಸಿಕೊಳ್ಳಲು ಪಾಕಿಸ್ತಾನಕ್ಕೆ ಕಳುಹಿಸಬಹುದು ಎಂದು ಮೋದಿ ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದರು. ಇನ್ನು ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಸೋಫಿಯಾ ಖುರೇಷಿಯನ್ನು ಧರ್ಮ ಮತ್ತು ಜಾತಿಯ ಆಧಾರದಲ್ಲಿ ಅಳೆದಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಬಿಜೆಪಿ ನಾಯಕರು ಕೂಡ ವಿಜಯ್ ಶಾ ಅವರ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. ಈ ನಡುವೆ ಸೇನಾಧಿಕಾರಿಯ ವಿರುದ್ಧದ ವಿವಾದಾತ್ಮಕ ಹೇಳಿಕೆಗಳಿಗೆ ವಿಜಯ್ ಶಾ ಕ್ಷಮೆ ಯಾಚಿಸಿದ್ದರು. ಆಕೆ ಭಾರತದ ಸಹೋದರಿ. ಸೋಫಿಯಾ ಮತ್ತು ಸೈನ್ಯವನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದರು. ಕನಸಿನಲ್ಲೂ ಸೋಫಿಯಾ ಖುರೇಷಿ ಬಗ್ಗೆ ತಪ್ಪಾಗಿ ಯೋಚಿಸಲು ಸಾಧ್ಯವಿಲ್ಲ ಎಂದಿದ್ದರು. ಆದರೆ, ಈ ಹೇಳಿಕೆಯ ಬಗ್ಗೆ ಜಬಲ್ಪುರ್ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿ ಅವರ ವಿರುದ್ಧ ಕೇಸ್ ದಾಖಲಿಸಿಕೊಳ್ಳಲು ಆದೇಶಿಸಿತ್ತು. ಇದಾದ ಬಳಿಕ ವಿಜಯ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಒತ್ತಾಯ ಹೆಚ್ಚಾಯಿತು.

ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ, ಕೋಮು ಮತ್ತು ಲಿಂಗ ತಾರತಮ್ಯದಿಂದ ಕೂಡಿದ ಹೇಳಿಕೆ ನೀಡಿದ್ದಕ್ಕಾಗಿ ಮಧ್ಯಪ್ರದೇಶದ ಸಚಿವೆ ವಿಜಯ್ ಶಾ ಅವರ ವಿರುದ್ಧ ಹೈಕೋರ್ಟ್ ಆದೇಶದ ಮೇರೆಗೆ ಪೊಲೀಸ್ ಪ್ರಕರಣ ದಾಖಲಿಸಿತ್ತು. ಖಂಡನೆಯ ಅಲೆಯನ್ನು ಹುಟ್ಟುಹಾಕಿರುವ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದ ನ್ಯಾಯಾಲಯವು ವಿಜಯ್ ಶಾ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತ್ತು. ಸಂಜೆಯೊಳಗೆ ಇದನ್ನು ಪೂರ್ಣಗೊಳಿಸಬೇಕು, ಇಲ್ಲದಿದ್ದರೆ ಪೊಲೀಸ್ ಮುಖ್ಯಸ್ಥರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಹುದು ಎಂದು ನ್ಯಾಯಾಲಯ ಹೇಳಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ವಿಜಯ್ ಶಾ, ನನ್ನ ಇತ್ತೀಚಿನ ಹೇಳಿಕೆಯಿಂದ ಪ್ರತಿಯೊಂದು ಸಮಾಜದ ಭಾವನೆಗಳಿಗೂ ನೋವಾಗಿದೆ. ಅದಕ್ಕಾಗಿ, ನಾನು ನಾಚಿಕೆಪಡುತ್ತೇನೆ, ತೀವ್ರ ದುಃಖಿತನಾಗಿದ್ದೇನೆ. ಕ್ಷಮೆ ಕೂಡ ಯಾಚಿಸುತ್ತೇನೆ. ಕರ್ನಲ್ ಸೋಫಿಯಾ ಈ ದೇಶದ ಸಹೋದರಿ. ಅವರು ತಮ್ಮ ರಾಷ್ಟ್ರೀಯ ಕರ್ತವ್ಯವನ್ನು ನಿರ್ವಹಿಸುವಾಗ ಜಾತಿ ಮತ್ತು ಸಮಾಜವನ್ನು ಮೀರಿ ಕೆಲಸ ಮಾಡಿದ್ದಾರೆ ಎಂದಿದ್ದರು. ಇದೀಗ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, ಸಚಿವರ ಹೇಳಿಕೆಗಳನ್ನು ಸ್ವೀಕಾರಾರ್ಹವಲ್ಲ ಮತ್ತು ಸಂವೇದನಾಶೀಲವಲ್ಲ ಎಂದು ಬಣ್ಣಿಸಿದರು, ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುವ ವ್ಯಕ್ತಿಗಳು ಮಾತಿನಲ್ಲಿ ಸಂಯಮವನ್ನು ಹೊಂದಿರಬೇಕು ಎಂದು ಹೇಳಿದರು.
 

No Reviews